news18-kannada Updated:April 16, 2021, 2:29 PM IST
ಸಿಎಂ ಬಿಎಸ್ ಯಡಿಯೂರಪ್ಪ
ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರು ಮತ್ತೆ ಕೊರೋನಾ ಸೋಂಕಿಗೆ ಒಳಗಾಗಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಜ್ವರ ಬಂದ ಹಿನ್ನೆಲೆಯಲ್ಲಿ ರಾಮಯ್ಯ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಪರೀಕ್ಷೆ ವರದಿಯಲ್ಲಿ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಈ ಹಿಂದೆ ಕೊರೋನಾ ಸೋಂಕಿಗೆ ತುತ್ತಾದಾಗ ಮಣಿಪಾಲ್ ಆಸ್ಪತ್ರೆಯಲ್ಲಿ ಬಿಎಸ್ವೈ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಅದರಂತೆ ಇದೀಗ ಮತ್ತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದಾರೆ.
ಜ್ವರದ ಲಕ್ಷಣ ಇದ್ದ ಕಾರಣ ಎರಡು ದಿನಗಳ ಹಿಂದೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದರು. ಆ ಪರೀಕ್ಷೆಯಲ್ಲಿ ವರದಿ ನೆಗೆಟಿವ್ ಬಂದಿತ್ತು. ಇಂದು ಮತ್ತೆ ಜ್ವರ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ರಾಮಯ್ಯ ಆಸ್ಪತ್ರೆಯಲ್ಲಿ ಪರೀಕ್ಷಾ ವರದಿ ಪಾಸಿಟಿವ್ ಬಂದ ಕಾರಣ ಅವರು ಈ ಹಿಂದೆ ಚಿಕಿತ್ಸೆ ಪಡೆದಿದ್ದ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಕಾರಿನ ಚಾಲಕ ಪಿಪಿಐ ಕಿಟ್ ಧರಿಸಿ, ಕರೆದುಕೊಂಡು ಹೋದರು.
ರಾಮಯ್ಯ ಮೆಮೋರಿಯಲ್ ಆಸ್ಪತ್ರೆ ಅಧ್ಯಕ್ಷರಾದ ಡಾ.ಕೆ.ಸಿ. ಗುರುದೇವ್ ಮಾತನಾಡಿ, ಸಿಎಂ ಬಿಎಸ್ ಯಡಿಯೂರಪ್ಪ ಅವರು ವೀಕ್ನೇಸ್ ಆಗಿದೆ ಅಂತಾ ಆಸ್ಪತ್ರೆಗೆ ಬಂದಿದ್ದರು. ಎಲ್ಲ ರೀತಿಯ ಚೆಕ್ ಮಾಡಿದ್ದೇವೆ. ಎಲ್ಲ ಟೆಸ್ಟ್ ಗಳನ್ನು ಮಾಡಿದ್ದೇವೆ. ಅದರ ರಿಪೋರ್ಟ್ ಬರಬೇಕು. ಭುಜದ ನೋವಿದೆ ಅಂತೇಳಿದ್ದಾರೆ, ಸಿಟಿ ಸ್ಕ್ಯಾನ್ ಮಾಡಿದ್ದೇವೆ, ನಾರ್ಮಲ್ ಇದೆ, ಏನೂ ಪ್ರಾಬ್ಲಂ ಇಲ್ಲ. ಸಿಎಂ ಯಡಿಯೂರಪ್ಪ ಫ್ಯಾಮಿಲಿ ಡಾಕ್ಟರ್ ಮಣಿಪಾಲ್ ಆಸ್ಪತ್ರೆಯಲ್ಲಿ ಇದ್ದಾರೆ. ಅವರ ಕುಟುಂಬದವರು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ಸಿಎಂ ಯಡಿಯೂರಪ್ಪ ಅವರಿಗೆ ಕೋವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ಕೋವಿಡ್ ಸಲಹೆ ಸೂಚನೆ ಪಡೆಯಲು ಭಾನುವಾರ ನಡೆಯಬೇಕಿದ್ದ ಸರ್ವಪಕ್ಷ ಸಭೆ ರದ್ದು ಮಾಡಲಾಗಿದೆ. ಸಭೆಗೆ ವಿಪಕ್ಷದ ಮುಖಂಡರಿಗೆ ಆಹ್ವಾನ ನೀಡಲಾಗಿತ್ತು. ಸಿಎಂ ಸಂಪರ್ಕದಲ್ಲಿದ್ದ ಮಂತ್ರಿಗಳಿಗೂ ಕ್ವಾರಂಟೈನ್ ಹಾಗೂ ಕೋವಿಡ್ ಟೆಸ್ಟ್ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆ ಮುಂದೂಡಿಕೆ ಮಾಡಲಾಗಿದೆ.
ಸಿಎಂ ಬಿಎಸ್ವೈಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸಿಎಂ ಜೊತೆಯಲ್ಲಿ ಇದ್ದವರಿಗೆ ಆತಂಕ ಶುರುವಾಗಿದೆ. ಚುನಾವಣಾ ಪ್ರಚಾರದಲ್ಲಿ ಭಾಗಿಯಾದವರು ಹಾಗೂ ಸಿಎಂ ಜೊತೆಗೆ ಸಭೆಗಳಲ್ಲಿ ಭಾಗಿಯಾದವರಿಗೆ ಆತಂಕ ಶುರುವಾಗಿದೆ. ಕಳೆದೊಂದು ವಾರದಿಂದ ಸಿಎಂ ಬೆಳಗಾವಿ, ಬಸವಕಲ್ಯಾಣ, ಮಸ್ಕಿಯಲ್ಲಿ ಪ್ರಚಾರ ಕೈಗೊಂಡಿದ್ದರು.
ಇದನ್ನು ಓದಿ: Coronavirus - ಏ. 20ರವರೆಗೆ ಹೊಸ ಕರ್ಫ್ಯೂ ಕ್ರಮ ಇಲ್ಲ: ಸಿಎಂ ಯಡಿಯೂರಪ್ಪ ಹೇಳಿಕೆ
ರಾಜ್ಯದಲ್ಲಿ, ಅದರಲ್ಲೂ ರಾಜ್ಯ ರಾಜಧಾನಿಯಲ್ಲಿ ಆತಂಕಕಾರಿ ಮಟ್ಟದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದು, ಪರಿಸ್ಥಿತಿ ಕೈಮೀರಿ ಹೋಗುವ ಸೂಚನೆ ಇದೆ. ಎರಡನೇ ಅಲೆಯ ಆರ್ಭಟಕ್ಕೆ ಸಿಲಿಕಾನ್ ಸಿಟಿ ತತ್ತರಿಸಿದೆ. ನಗರದಲ್ಲಿ ಈಗಾಗಲೇ ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಆದರೆ ಇನ್ನೂ ಹೆಚ್ಚಿನ ಬಿಗಿಕ್ರಮ ಕೈಗೊಳ್ಳಬೇಕೆಂಬ ಅಭಿಪ್ರಾಯಗಳು ಬಲವಾಗಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಬೆಳಗ್ಗೆ ತಜ್ಞರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದರು.
Published by:
HR Ramesh
First published:
April 16, 2021, 2:26 PM IST